ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ತನ್ನ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ ಮಜಲುಗಳತ್ತ ಹಿನ್ನೋಟ ಬೀರಿ, ತನ್ನ ತನು ಮನ ಧನಗಳನ್ನು ತನ್ನ ವೃತ್ತಿಗೆ ಪುನಃ ಅರ್ಪಿಸಿಕೊಳ್ಳುವ ಸುದಿನ.
ಆರೋಗ್ಯವೇ ಭಾಗ್ಯ. ಪ್ರತಿಯೊಬ್ಬರು ಆರೋಗ್ಯವಂತರಾಗಿ ಬಾಳಿದಾಗ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯ. ಆದರೆ ಇಂದು ಪ್ರತಿಯೊಬ್ಬರು ಒತ್ತಡದ ಜೀವನದಿಂದಾಗಿ ಹತ್ತಾರು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಪ್ರತಿಯೊಬ್ಬರು ಆರೋಗ್ಯವಂತರಾಗಿರುವುದು ಅವಶ್ಯಕ. ಜುಲೈ ಒಂದರಂದು ಭಾರತದಲ್ಲಿ ವೈದ್ಯರ ದಿನ ಆಚರಿಸಲಾಗುತ್ತದೆ. ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಹತ್ತಾರು ವಿಧಾನಗಳ ಮೂಲಕ ನಮ್ಮೆಲ್ಲರ ಆರೋಗ್ಯಕ್ಕಾಗಿ ತಮ್ಮ ಬದುಕನ್ನು ಶ್ರೀಗಂಧದ ಕೊರಡಿನಂತೆ ಸವೆಸಿಕೊಂಡು ಮನುಕುಲದ ಏಳಿಗೆಗೆ ತಮ್ಮ ಬದುಕನ್ನು ಸಮರ್ಪಿಸಿ ಕೊಂಡಿರುವ ವೈದ್ಯರಿಗೆ ಅಭಿನಂದಿಸುವ, ಕೃತಜ್ಞತೆ ಸೂಚಿಸುವ ದಿನ.
ನಮ್ಮ ದೇಹದ ಆರೋಗ್ಯದಲ್ಲಿ ವೈಪರೀತ ಬಂದಾಗ ಜೀವನ್ಮರಣದ ನಡುವೆ ಬದುಕಲು ಹೆಣಗಾಡುತ್ತಿರುವಾಗ ನೋವು ಶಮನಗೊಳಿಸಿ, ದೈರ್ಯ ತುಂಬಿ, ಆತ್ಮವಿಶ್ವಾಸ ತುಂಬಿ ಬಾಳಿಗೆ ಬೆಳಕು ನೀಡಿ ಹೊಸ ಜೀವನಕ್ಕೆ ರಹದಾರಿ ಮಾಡಿ ಕೊಟ್ಟ ನಮ್ಮ ನೆಚ್ಚಿನ ವೈದ್ಯರನ್ನು ಸ್ಮರಿಸುವ, ನೆನಪಿಸಿಕೊಳ್ಳುವ ಮತ್ತು ಆದರಿಸುವ ಸ್ಮರಣೀಯವಾದ ದಿನವಿದು. ಅಂದು ಭಾರತದ ವೈದ್ಯರೆಲ್ಲರೂ ಅಭಿಮಾನ ಪಡುವ ಮಹಾವೈದ್ಯ ಶಿಕ್ಷಣ ತಜ್ಞ, ಸ್ವಾತಂತ್ರ ಹೋರಾಟಗಾರ ಶ್ರೇಷ್ಠ ರಾಜಕೀಯ ಧುರೀಣ ಅಪ್ರತಿಮ ವ್ಯಕ್ತಿತ್ವದ ಡಾ. ಬಿ.ಸಿ. ರಾಯ್ ಜನ್ಮವೆತ್ತ ದಿನ. (1881 ಜುಲೈ 1) ಇವರ ಸವಿನೆನಪಿಗಾಗಿ ಈ ದಿನವನ್ನು ವೈದ್ಯರ ದಿನ ಎಂದು ಆಚರಿಸುತ್ತೇವೆ.
ಈ ದಿನದಂದು ಭಾರತದ ಎಲ್ಲ ವೈದ್ಯ ಭಾಂದವರು ಸಮಾಜದ ಬಡತನ ರೇಖೆಗಿಂತ ಕೆಳಗಿರುವ ಮನುಸಂಕುಲದ ಉದ್ಧಾರಕ್ಕಾಗಿ ಪ್ರತಿಜ್ಞೆ ಮಾಡುತ್ತಾರೆ. ಬಿಹಾರದ ಪಾಟ್ನಾದಲ್ಲಿ ಜನಿಸಿದ ಬಿ.ಸಿ.ರಾಯ್ ಅವರು ಕಲ್ಕತ್ತದಲ್ಲಿ ಎಂ.ಬಿ.ಬಿ.ಎಸ್. ಶಿಕ್ಷಣ ಮುಗಿಸಿದರು. ಅವರ ಜ್ಞಾನ ಸಂಪತ್ತಿಗೆ, ಅವರ ಅನುಭವಕ್ಕೆ ಯೋಗ್ಯತೆಗೆ ಇಂಗ್ಲೆಂಡ್ನ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಸಿಗುತ್ತಿತ್ತು.
ಆದರೆ ತಾಯಿ ನಾಡಿನ ವ್ಯಾಮೋಹ ಅವರನ್ನು ಬಿಡಲಿಲ್ಲ. 1911 ರಲ್ಲಿ ಭಾರತಕ್ಕೆ ಬಂದು ನಮ್ಮ ದೇಶದ ಬಡಜನರ ಉದ್ದಾರಕ್ಕಾಗಿ ಟೊಂಕ ಕಟ್ಟಿ ನಿಂತರು. ಕಲ್ಕತ್ತಾ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಾಗಿ ಸಾವಿರಾರು ಮಂದಿ ಯುವ ವೈದ್ಯರಿಗೆ ಆದರ್ಶ ಪ್ರಾಯರಾದರು. ಇವತ್ತಿಗೂ ಅವರಿಂದ ಕಲಿತ ನೂರಾರು ವೈದ್ಯರು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಮಿನುಗುತ್ತಿದ್ದಾರೆ. ಅವರು ತಮ್ಮ ಪ್ರತಿ ರೋಗಿಗಳಲ್ಲಿ ದೇವರನ್ನು
ಕಾಣುತ್ತಿದ್ದರು.
“Poor are my Patients pay for them” ಎಂಬ ಉಕ್ತಿಯನ್ನು ತಮ್ಮ ಜೀವನದುದ್ದಕ್ಕೂ ಅಕ್ಷರಶಃ ಪಾಲಿಸಿದ ವ್ಯಕ್ತಿ ಬಿ.ಸಿ. ರಾಯ್ ಎಂದರೆ ಅತಿಶಯೋಕ್ತಿಯಲ್ಲ. ತಾವು ನಂಬಿದ ತತ್ವ, ಆದರ್ಶ ಧ್ಯೇಯಗಳನ್ನು ಬಲಿಗೊಡದೆ ವೈದ್ಯಕೀಯ ವೃತ್ತಿಯನ್ನು ಪ್ರಾಮಾಣಿಕವಾಗಿ ಜೀವನದಲ್ಲಿ ಆಳವಡಿಸಿಕೊಂಡು ನುಡಿದಂತೆಯೇ ನಡೆದರು. ಸ್ವಾತಂತ್ಯ ಬಳಿಕ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪದವಿ ಏರಿ ತಮ್ಮ ಪದವಿಯ ಗೌರವವನ್ನು ಇಮ್ಮಡಿಗೊಳಿಸಿದರು. ಹಲವಾರು ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳನ್ನು ಕಟ್ಟಿಸಿ ಬಡ ವಿದ್ಯಾರ್ಥಿಗಳಿಗೆ ಬಡ ರೋಗಿಗಳಿಗೆ ಆಶಾಕಿರಣವಾದರು.
ಹೀಗೆ ವೈದ್ಯಕೀಯ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮತ್ತು ಧಾರ್ಮಿಕ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಕಾರ್ಯಬಾಹುಳ್ಯವನ್ನು ವಿಸ್ತರಿಸಿಕೊಂಡು, ಗಾಂಧೀಜಿ ಕನಸು ಕಂಡ ರಾಮರಾಜ್ಯದ ಸ್ಥಾಪನೆಗೆ ತಮ್ಮ ಜೀವನವನ್ನು ಮುಡಿಪಾಗಿಸಿದರು. ಸುಮಾರು 80 ವರ್ಷಗಳ ಕಾಲ ಸಾರ್ಥಕ ಜೀವನ ನಡೆಸಿ 1962 ಜುಲೈ ಒಂದರಂದು ಕೀರ್ತಿಶೇಷರಾದರು.
ಭಾರತ ಸರಕಾರ ರಾಯ್ ಅವರ ಸೇವೆಯನ್ನು ಗುರುತಿಸಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ನೀಡಿದ ವ್ಯಕ್ತಿಗಳನ್ನು ಗುರುತಿಸಿ 1976ರಿಂದ ಬಿ.ಸಿ.ರಾಯ್ ಪ್ರಶಸ್ತಿ ನೀಡಲು ಆರಂಭಿಸಿತ್ತು. ಇದು ಈ ಮಹಾವ್ಯಕ್ತಿಯ ಮಾನವೀಯ ಸೇವೆಗೆ ನೀಡಿದ ಕಿಂಚಿತ್ ಕಿರು ಕಾಣಿಕೆ ಎಂದರೂ ತಪ್ಪಲ್ಲ. ನಮಗೆ ಸ್ವಾತಂತ್ರ್ಯ ಲಭಿಸಿ ಸುಂಆರು 60ಕ್ಕೂ ಹೆಚ್ಚು ವರ್ಷಗಳು ಕಳೆದಿದೆ. ಗಂಗೆ, ಯಮುನೆ, ಕಾವೇರಿ ನದಿಗಳಲ್ಲಿ ಸಾಕಷ್ಟು ನೀರು ಹರಿದಿದೆ.
ಕಾಲ ಬದಲಾದಂತೆ ನಮ್ಮ ಜೀವನಶೈಲಿ, ಆದರ್ಶಗಳೂ ಬದಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅದ್ಭುತವಾದ ಕ್ರಾಂತಿಗಳು , ಆವಿಷ್ಕಾರಗಳು ನಡೆದಿದೆ. ಹೊಸ ಹೊಸ ರೋಗಗಳು ಹೊಸ ಹೊಸ ಔಷಧಿಗಳಾಗಿ ಹುಟ್ಟಿಕೊಂಡಿವೆ. ಇನ್ನೊಂದೆಡೆ ರೋಗಿ ಮತ್ತು ವೈದ್ಯರ ನಡುವಿನ ಭಾವಾನಾತ್ಮಕ ಸಂಬಂಧಗಳು ಶಿಥಿಲವಾಗುತ್ತಿದೆ. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವನೆ ಹೆಚ್ಚಾಗಿ ಬೆಳೆಯುತ್ತಿರುವುದು ವಿಷಾದನೀಯ ವಿಚಾರ. ವೈದ್ಯ ಶಿಕ್ಷಣವಿರಲಿ, ವೈದ್ಯಕೀಯ ವೃತ್ತಿಯಿರಲಿ, ಸಂಶೋಧನೆಗಳೇ ಇರಲಿ ಎಲ್ಲಾ ಕಡೆಯೂ ಧನ ಬಲವೇ ವಿಜೃಂಭಿಸುತ್ತಿದೆ.
ಪ್ರತಿಭೆ, ಪ್ರಾಮಾಣಿಕ ಪರಿಶ್ರಮಗಳಿಗೆ ಕಿಂಚಿತ್ತೂ ಬೆಲೆ ಸಿಗುತ್ತಿಲ್ಲ. ಇದು ಸುಂದರ, ಸುದೃಷ್ಟ ಸ್ವಸ್ಥ ಸಮಾಜಕ್ಕೆ ಖಂಡಿತ ಮಾರಕವಾಗಬಹುದು. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಜನತೆ, ಸಂಘ-ಸಂಸ್ಥೆಗಳು ಮತ್ತು ಸರಕಾರ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಅರ್ಹ ಪ್ರತಿಭಾವಂತರಿಗೆ ವೈದ್ಯಕೀಯ ಶಿಕ್ಷಣಕ್ಕೆ ಅವಕಾಶ ದೊರೆತು, ಆರೋಗ್ಯ ಕ್ಷೇತ್ರದಲ್ಲಿ ತೀವ್ರತರವಾದ ಸಂಶೋಧನೆಗಳು ನಡೆಯಬೇಕು.
ಹೊಸದಾಗಿ ಹುಟ್ಟಿಕೊಳ್ಳುತ್ತಿರುವ ರೋಗಗಳಿಗೂ ಮತ್ತು ತಲೆತಲಾಂತರಗಳಿಂದ ಬಾಧಿಸುತ್ತಿರುವ ರೋಗಗಳಿಗೂ ಕಡಿವಾಣ ಹಾಕಬೇಕು. ಔಷÀಧ, ಶುಶ್ರೂಷೆ ಮತ್ತು ಎಲ್ಲ ಪ್ರಾಥಮಿಕ ಆರೋಗ್ಯ ಸೌಲಭ್ಯಗಳು ಬಡಜನರ ಮನೆ ಬಾಗಿಲಿಗೆ ತಲುಪಬೇಕು. ಈ ನಿಟ್ಟಿನಲ್ಲಿ ನಿಸ್ವಾರ್ಥದಿಂದ ಸೇವಾ ಮನೋಭಾವದಿಂದ ಹಗಲಿರುಳು ತಮ್ಮ ಜೀವನವನ್ನು ರೋಗಿಗಳ ಒಳಿತಿಗಾಗಿ ತೊಡಗಿಸಿಕೊಂಡು ವೈದ್ಯರನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯಬೇಕು.
ಕೊನೆಯದಾಗಿ ರೋಗಿಗಳಿಗೂ ಒಂದೆರಡು ಕಿವಿಮಾತು :
ದಯವಿಟ್ಟು ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ನಿಮ್ಮ ವೈದ್ಯರ ಮೇಲೆ ಪೂರ್ಣ ಭರವಸೆ ಇಡಿ. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಮುಕ್ತವಾಗಿ ವೈದ್ಯರ ಬಳಿ ತೆರೆದಿಡಿ. ವೈದ್ಯರೂ ಕೂಡ ನಿಮ್ಮಂತೆಯೇ ಇರುವ ಇನ್ನೊಂದು ಜೀವ. ಅವರಿಗೆ ಆಸೆ, ಆಕಾಂಕ್ಷೆಗಳು, ವೈಯಕ್ತಿಕ ಸಮಸ್ಯೆಗಳು ಭಾವನೆಗಳು ಇರುತ್ತವೆ. ಅವರ ಭಾವನೆಗಳಿಗೆ, ನೋವುಗಳಿಗೂ ರೋಗಿಗಳು ಸ್ಪಂದಿಸಬೇಕು.
ಹಾಗಿದ್ದಲ್ಲಿ ಮಾತ್ರ ವೈದ್ಯ-ರೋಗಿಗಳ ನಡುವೆ ಸುಮಧುರ ಬಾಂಧವ್ಯ ಬೆಳೆದು ಸ್ಪಷ್ಟ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ. ನೆನೆಪಿಡಿ, ಈಗಿರುವ ಕಾಲಘಟ್ಟದಲ್ಲಿ ರೋಗಿಗಳು ವೈದ್ಯರಿಲ್ಲದೆ ಬದುಕಬಹುದು. ಆದರೆ ವೈದ್ಯರು ರೋಗಿಗಳಿಲ್ಲದೆ ಬದುಕುವುದು ಅಸಾಧ್ಯ ಎಂಬ ಮಾತು ಬಂದರೆ ಅತಿಶಯೋಕ್ತಿಯಲ್ಲ. ರೋಗಿಗಳು ಕೂಡಾ ವೈದ್ಯರಿಗೆ ರೋಗದ ಬಗ್ಗೆ ಸಂಪೂರ್ಣ ಪರಾಮರ್ಶೆ ಮಾಡಲು ಕಾಲಾವಕಾಶ ನೀಡಬೇಕು.
ದಿನ ಬೆಳಗಾಗುವುದರೊಳಗೆ ಕಾಯಿಲೆ ವಾಸಿಯಾಗಬೇಕು ಎಂದು ವೈದ್ಯರ ಮೇಲೆ ಅನಗತ್ಯ ಒತ್ತಡ ಹಾಕಬೇಡಿ. ಅನಗತ್ಯ ಪ್ರಶ್ನೆಗಳನ್ನು ಕೇಳಿ ಅಂತರ್ ಜಾಲದ ಮಾಹಿತಿಯನ್ನು ವೈದ್ಯರ ಬಳಿ ತಿಳಿಸಿ ತಮ್ಮ ಅಲ್ಪ ಸ್ವಲ್ಪ ಜ್ಞಾನದಿಂದ ವೈದ್ಯರ ದಾರಿ ಕೆಡಿಸಬೇಡಿ. ಸುಮಾರು ಪ್ರತಿಶತ ಮೂವತ್ತರಷ್ಟು ರೋಗ ವೈದ್ಯರ ಮೇಲಿನ ನಂಬಿಕೆಯ ತಳಹದಿಯಲ್ಲೇ ಗುಣವಾಗುತ್ತದೆ. ನೆನಪಿರಲಿ, ದೇಹದ ರೋಗವನ್ನು ವೈದ್ಯರು ಗುಣಪಡಿಸಬಹುದು ಆದರೆ ಮನಸ್ಸಿನ ರೋಗವನ್ನು ಗುಣಪಡಿಸಲು ವೈದ್ಯರಿಗೆ ಅಸಾಧ್ಯ ಎನ್ನುವುದು ಮನಸ್ಸಿನ ಮನೋಸ್ಥಿತಿ ಎಂದು ಅರಿತುಕೊಂಡಲ್ಲಿ ಎಲ್ಲ ವೈದ್ಯರ ಕೆಲಸ ಸರಳವಾಗುವುದರಲ್ಲಿ ಎರಡು ಮಾತಿಲ್ಲ.
ವೈದ್ಯರೂ ಆತ್ಮ ವಿಮರ್ಶೆ ಮಾಡಿಕೊಂಡು ತಮ್ಮ ವೈದ್ಯಕೀಯ ವೃತ್ತಿಯನ್ನು ಪಾಲಿಸಿದಲ್ಲಿ ಸುಂದರ ಸುದೃಢ ಸಮಾಜ ನಿರ್ಮಾಣವಾಗಬಹುದು. ಅದುವೇ ನಾವು ಬಿ.ಸಿ. ರಾಯ್ ಎಂಬ ಮಹಾನ್ ಚೇತನಕ್ಕೆ ನೀಡುವ ಬಹುದೊಡ್ಡ ಗೌರವ ಎಂದರೂ ತಪ್ಪಲ್ಲ. ಎಲ್ಲ ವೈದ್ಯಬಾಂಧವರಿಗೂ ಸುಖ, ಸಂತಸ, ನೆಮ್ಮದಿ ಸಿಗಲಿ ಎಂದು ತುಂಬು ಹೃದಯದಿಂದ ಹಾರೈಸೋಣ…
No Comment
You can post first response comment.